ಘಟಪ್ರಭಾ:ರಾಜ್ಯದಲ್ಲಿ ನಿದ್ರೆ ಮಾಡುವ ಸರ್ಕಾರವನ್ನು ಮನೆಗೆ ಕಳುಹಿಸಿ : ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ ಅಭಿಮತ
ರಾಜ್ಯದಲ್ಲಿ ನಿದ್ರೆ ಮಾಡುವ ಸರ್ಕಾರವನ್ನು ಮನೆಗೆ ಕಳುಹಿಸಿ : ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ ಅಭಿಮತ
ಘಟಪ್ರಭಾ ಜು 13 : ರಾಜ್ಯದಲ್ಲಿ ನಿದ್ರೆ ಮಾಡುವ ಸರ್ಕಾರವನ್ನು ಮನೆಗೆ ಕಳುಹಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತನು ಕೇಂದ್ರ ಸರ್ಕಾರದ ಹಲವು ಮಹತ್ತರ ಜನಪರ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಿದರೆ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿಗೆ ಸಮೀಪದ ಅರಭಾವಿಯಲ್ಲಿ ಸಂಜೆ ಜರುಗಿದ ಅರಭಾವಿ ಶಕ್ತಿಕೇಂದ್ರದ ವಿಸ್ತಾರಕರ ಸಭೆಯಲ್ಲಿ ಸಸಿ ನೆಟ್ಟು ಮಾತನಾಡಿದ ಅವರು, ಕಾರ್ಯಕರ್ತರು ಈ ದಿಸೆಯಲ್ಲಿ ಶಕ್ತಿಮೀರಿ ಪ್ರಯತ್ನಿಸಿ ಬಿಜೆಪಿ ಸರ್ಕಾರದ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಕಾರ್ಯಕರ್ತರಿಗೆ ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರದ ಸಾಧನೆ ಶೂನ್ಯವಾಗಿದೆ. ಅಭಿವೃದ್ಧಿಯಂತೂ ದೂರದ ಮಾತು. ರಾತ್ರಿ-ಹಗಲು ನಿದ್ರೆ ಮಾಡುವುದೇ ಈ ಸರ್ಕಾರದ ಸಾಧನೆಯಾಗಿದೆ. ಸ್ಥಿರ ಹಾಗೂ ಅಭಿವೃದ್ಧಿಗಾಗಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕಾಗಿದೆ. ರಾಜ್ಯದಲ್ಲಿ ಕಾಂಗ್ರೇಸ್ ಮುಕ್ತವನ್ನಾಗಿಸಲು ಬಿಜೆಪಿಗೆ ಪ್ರಚಂಡ ಬಹುಮತ ಸಾಧಿಸಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು. ಅದರಲ್ಲೂ 150+ ಮಿಷನ್ ಗುರಿಯನ್ನು ತಲುಪಲು ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿಸಲು ಕಾರ್ಯಕರ್ತರು ದುಡಿಯಬೇಕೆಂದು ತಿಳಿಸಿದರು.
ಬೆಳಗಾವಿ ಜಿಲ್ಲೆಯಲ್ಲಿ 15 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಶಾಲಿಯಾಗಬೇಕು. ಈ ಮೂಲಕ ಕಾಂಗ್ರೇಸ್ ಪಕ್ಷವನ್ನು ಮನೆಗೆ ಕಳುಹಿಸಬೇಕು. ಪ್ರತಿ ಬೂಥ ಮಟ್ಟದಲ್ಲಿ ಕಾರ್ಯಕರ್ತರು ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು. ಕಾರ್ಯಕರ್ತರೇ ನಮ್ಮ ಪಕ್ಷದ ಆಸ್ತಿಯಾಗಿದ್ದು, ರಾಜ್ಯ ಸರ್ಕಾರದ ವೈಫಲ್ಯತೆಗಳನ್ನು ಜನರ ಮುಂದಿಟ್ಟುಕೊಂಡು ಚುನಾವಣೆಗೆ ಸನ್ನದ್ಧರಾಗುವಂತೆ ತಿಳಿಸಿದರು.
ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, 2018 ರಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಶತಸಿದ್ಧ. ಇದರಲ್ಲಿ ಯಾವುದೇ ಸಂಶಯವಿಲ್ಲ. ಕೇಂದ್ರ ಸರ್ಕಾರ ಕೈಗೊಂಡಿರುವ ಜನಪರ ಕಾರ್ಯಕ್ರಮಗಳನ್ನು ಪ್ರತಿ ಮನೆ ಬಾಗಿಲಿಗೆ ಕೊಂಡೊಯ್ಯುವ ಜವಾಬ್ದಾರಿ ಕಾರ್ಯಕರ್ತರದ್ದಾಗಿದೆ. ರಾಜ್ಯದ ಅಭಿವೃದ್ಧಿಯಾಗಲು ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯವೆಂದು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಬೈಲಹೊಂಗಲ ಶಾಸಕ ಡಾ.ವಿಶ್ವನಾಥ ಪಾಟೀಲ(ಅರವಳ್ಳಿ), ರಾಜ್ಯ ಬಿಜೆಪಿ ಸ್ಲಂ ಮೋರ್ಚಾ ಉಪಾಧ್ಯಕ್ಷ ರಾಜು ಮಗಿಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗೂಳಪ್ಪ ಹೊಸಮನಿ, ಗುರುಪಾದ ಕಳ್ಳಿ, ಬೆಳಗಾವಿ ನಗರ ಸೇವಕ ದೀಪಕ ಜಮಖಂಡಿ, ಜಿಪಂ ಸದಸ್ಯ ಗೋವಿಂದ ಕೊಪ್ಪದ, ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಅರಭಾವಿ ವಿಧಾನಸಭಾ ಕ್ಷೇತ್ರದ ಶಕ್ತಿಕೇಂದ್ರಗಳ ಪ್ರಮುಖರು, ಅರಭಾವಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಪದ್ಮಾವತಿ ದೇವುಗೋಳ, ಪಪಂ ಸರ್ವ ಸದಸ್ಯರು ಹಾಗೂ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅರಭಾವಿಯ ಸರ್ಕಾರಿ ಕಗಂ ಶಾಲೆಯ ಆವರಣದಲ್ಲಿ ಪಂ.ದೀನದಯಾಳ ಉಪಾಧ್ಯೇ ಜನ್ಮಶತಾಬ್ಧಿ ನಿಮಿತ್ಯ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿದರು. ಪಾದಯಾತ್ರೆ ನಡೆಸಿದ ಮುಖಂಡರು ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನರಿಗೆ ವಿವರಿಸಿದರು.