ಬೆಟಗೇರಿ:ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟದ ಆಹಾರ ಧಾನ್ಯ ವಿತರಣೆ
ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟದ ಆಹಾರ ಧಾನ್ಯ ವಿತರಣೆ
ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಎ 2 :
ದೇಶಾದ್ಯಂತ ಹರಡುತ್ತಿರುವ ಮಹಾಮಾರಿ ಕರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆಯಾದ ಹಿನ್ನಲೆಯಲ್ಲಿ ಈಗ ಸರ್ಕಾರದ ಆದೇಶದಂತೆ ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ 8ರಿಂದ 10ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದ ಆಹಾರ ಧಾನ್ಯವನ್ನು ಬುಧವಾರ ಮತ್ತು ಗುರುವಾರದಂದು ವಿತರಿಸಿದರು.
ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಮಾತನಾಡಿ, ಸ್ಥಳೀಯ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿರುವ ಪಾಲಕರಿಗೆ ಕರೊನಾ ವೈರಸ್ ತಡೆಗಟ್ಟುವ ಮುಂಜಾಗ್ರತಾ ಕ್ರಮಗಳ ಕುರಿತು ಮನವರಿಕೆ ಮಾಡಿಕೊಡಬೇಕು. ತಾವು ಮತ್ತು ತಮ್ಮ ಮನೆಯಲ್ಲಿರುವ ಎಲ್ಲರೂ ಸ್ವಯಂ ಪ್ರೇರಿತರಾಗಿ ಮಾಸ್ಕ್ ಧರಿಸಬೇಕು. ಎಲ್ಲರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಕರೊನಾ ವೈರಸ್ ನಿಯಂತ್ರಣಾ ಕ್ರಮಗಳನ್ನು ಅನುಸರಿಸಬೇಕು ಎಂದು ತಿಳಿಸಿದರು.
ಇಲ್ಲಿಯ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದ ಆಹಾರ ಧಾನ್ಯವನ್ನು ವಿತರಣೆ ವೇಳೆ ಶಾಲಾ ಮಕ್ಕಳು ಮಾಸ್ಕ್ ಧರಿಸುವಂತೆ ಮತ್ತು ಒಬ್ಬಬ್ಬರಾಗಿ ಸರತಿ ಸಾಲಿನಲ್ಲಿ ನಿಂತು ಸಾಮಾಜಿಕ ಅಂತರ ಕಾಪಾಡುವಂತೆ, ಬಿಸಿಯೂಟದ ಆಹಾರ ಧಾನ್ಯ ಪಡೆಯುವಂತೆ ಹೇಳುತ್ತಾ ಕಳೆದ ಎರಡು ದಿನಗಳಿಂದ ಸ್ಥಳೀಯ ಕರೊನಾ ಸೈನಿಕರು ತಮ್ಮ ಸೇವಾ ಕಾರ್ಯ ನಿರ್ವಹಿಸಿದರು.
ಶಾಲೆಯ ಮಧ್ಯಾಹ್ನ ಬಿಸಿಯೂಟದ ಅಡುಗೆ ಸಿಬ್ಬಂದಿ, ಶಿಕ್ಷಕರು, ವಿದ್ಯಾರ್ಥಿಗಳು, ಕರೊನಾ ಸೈನಿಕರು, ಮತ್ತೀತರರು ಇದ್ದರು.